ಸ್ವಾತಂತ್ರ್ಯ_ಯಾರಿಂದ_ಬಂತು.....ಕಿತ್ತೂರು_ರಾಣಿ_ಚೆನ್ನಮ್ಮ 🙏🙏

#ಸ್ವಾತಂತ್ರ್ಯ_ಯಾರಿಂದ_ಬಂತು

#ಕಿತ್ತೂರು_ರಾಣಿ_ಚೆನ್ನಮ್ಮ
ಬೆಳಗಾವಿ ಜಿಲ್ಲೆಯ ಕಿತ್ತೂರು ಇಂದು ರಾಣಿ ಚೆನ್ನಮ್ಮನಿಂದಾಗಿ ವಿಶ್ವ ವಿಖ್ಯಾತವಾಗಿದೆ. ಈ ಕಿತ್ತೂರನ್ನು ಆಳಿದ ದೇಸಾಯಿಗಳಲ್ಲಿ ಅತ್ಯಂತ ಪ್ರಮುಖರಾದ ಮಲ್ಲಸರ್ಜ ದೇಸಾಯಿಯವರ ಎರಡನೇ ಪತ್ನಿಯಾಗಿದ್ದ ವೀರ ರಾಣಿ ಚೆನ್ನಮ್ಮ ತನ್ನ ಪುಟ್ಟ ರಾಜ್ಯ ಕಿತ್ತೂರಿನ ರಕ್ಷಣೆಗಾಗಿ ಬಹುತೇಕ ಭಾರತವನ್ನೇ ಆಕ್ರಮಿಸಿಕೊಂಡಿದ್ದ ಪ್ರಬಲರಾದ ಬ್ರಿಟೀಷರ ವಿರುದ್ದ ಸೆಟೆದು ನಿಂತವಳು. ತಾನೊಬ್ಬಳೇ ಏಕಾಂಗಿಯಾಗಿ ಹೋರಾಡಿದ ಈ ಧೀರ ಮಹಿಳೆಯ ಕಥೆ ಎಂಥವರಿಗೂ ಸ್ಪೂರ್ತಿದಾಯಕವಾಗಬಲ್ಲುದು.

ರಾಣಿ ಚೆನ್ನಮ್ಮ ಹುಟ್ಟಿದ್ದು ಬೆಳಗಾವಿ ನಗರದಿಂದ ಆರು ಕಿಲೋಮೀತರ್ ದೂರದಲ್ಲಿರುವ ಕಾಕತಿ ಎಂಬ ಪುಟ್ಟ ಗ್ರಾಮದಲ್ಲಿ. ೧೭೭೮ರಲ್ಲಿ ಹುಟ್ಟಿದ ಚೆನ್ನಮ್ಮಳ ತಂದೆ ಕಾಕತಿಯ ದೇಸಾಯಿಯಾಗಿದ್ದ ಧೂಳಪ್ಪಗೌಡರು. ಚೆನ್ನಮ್ಮ ತಾನು ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವಿದ್ಯೆಯಲ್ಲಿ ಪರಿಣಿತಿಯನ್ನು ಪಡೆದಿದ್ದಳು. ಚಿಕ್ಕಂದಿನಿಂದಲೂ ಅಂಜಿಕೆ ಯಿರದ ಧೈರ್ಯವಂತೆಯಾಗಿದ್ದ ಚೆನ್ನಮ್ಮಳು ತಾನು ಎಂತಹಾ ಕಷ್ಟದ ಪರಿಸ್ಥಿತಿಯನ್ನೂ ಎದುರಿಸಬಲ್ಲವಳಾಗಿದ್ದಳು. ಹೀಗಾಗಿಯೇ ಮುಂದೆ ತನ್ನ ರಾಜ್ಯಕ್ಕೆದುರಾದ ಕಠಿಣ ಪರಿಸ್ಥಿತಿಯಲ್ಲಿಯೂ ತಾನು ಒಂದಿನಿತೂ ಅಳುಕದೆ ರಾಜನಿಷ್ಠರಾಗಿದ್ದ ಗುರುಸಿದ್ದಪ್ಪ, ನರಸಿಂಗರಾವ್ ಮತ್ತಿತರರ ಬೆಂಬಲದೊಡನೆ ತನ್ನ ದತ್ತು ಮೊಮ್ಮಗನಿಗೆ ಪಟ್ಟಕಟ್ಟಿದ್ದಳು.

ಬಿಜಾಪುರ ಸುಲ್ತಾನರ ಪತನದ ಬಳಿಕ ಉತ್ತರ ಕರ್ನಾಟಕದಾದ್ಯಂತ ಒಂದು ಬಗೆಯ ಅರಾಜಕತೆಯುಂಟಾಗುತ್ತದೆ. ದಕ್ಷಿಣದ ಮೈಸೂರನ್ನಾಳುತ್ತಿದ್ದ ಒಡೆಯರ್ ರನ್ನು ಮೂಲೆಗುಂಪು ಮಾಡಿ ರಾಜ್ಯದ ಆಡಳಿತವನ್ನೆಲ್ಲಾ ತಮ್ಮ ಕೈಗೆ ತೆಗೆದುಕೊಂಡಿದ್ದ ಹೈದರ್ ಹಾಗೂ ಟಿಪ್ಪು ಸುಲ್ತಾನರುಗಳು ಉತ್ತರದಲ್ಲಿನ ಆ ಅರಾಜಕತೆಯ ಲಾಭವನ್ನು ಪಡೆಯಲು ಹವಣಿಸುತ್ತಿದ್ದರೆ ಇನ್ನೊಂದು ಕಡೆ ಮರಾಠಾ ಪೇಶ್ವೆಗಳು ಸಹ ತಮಗೆ ಎಲ್ಲಾದರೂ ಅವಕಶ ದಕ್ಕೀತೆಂದು ಕಾಯುತ್ತಿರುತ್ತಾರೆ. ಇನ್ನೊಂದು ಕಡೆ ಭಾರತೀಯ ರಾಜರುಗಳ ಈ ಒಳಜಗಳ, ಅದರಿಂದುಂಟಾದ ಅರಾಜಕತೆ ಇವು ಬ್ರಿಟೀಷರು ಭಾರತದಲ್ಲಿ ತಮ್ಮ ಭದ್ರ ನೆಲೆಯನ್ನು ಕಂಡುಕೊಳ್ಳಲು ಸಹಕಾರಿಯಾದವು.

ಪರಿಸ್ಥಿತಿ ಹೀಗಿರಲು ಟಿಪ್ಪು ಸುಲ್ತಾನನು ಕಿತ್ತೂರಿನ ದೊರೆ ಮಲ್ಲಸರ್ಜನನ್ನು ಬಂಧಿಸಿ ಕಪಾಲದುರ್ಗ ಎನ್ನುವಲ್ಲಿ ಸೆರೆಯಿಟ್ಟಿದ್ದನು. ಅವನ ಸೆರೆವಾಸದಿಂದ ತಪ್ಪಿಸಿಕೊಂಡ ದೊರೆ ಮಲ್ಲಸರ್ಜನು 1803 ರಲ್ಲಿ ಅಂದಿನ ಬ್ರಿಟೀಷ್ ಗವರ್ನರ್ ಲಾರ್ಡ್ ವೆಲ್ಲಸ್ಲಿ ಗೆ ನೆರವು ನೀಡುವ ಮೂಲಕ ಕಿತ್ತೂರು ಸಂಥಾನವನ್ನು ಭದ್ರಗೊಳಿಸಿದ್ದನು. 1809 ರಲ್ಲಿ ಮರಾಠ ಪೇಶ್ವೆಯವರಿಗೂ ನೆರವಾಗಿ ಅವರಿಂದ ಸನ್ನದನ್ನು ಹೊಂದಿದ್ದನು. ಆದರೆ ಪೇಶ್ವೆಗಳು ತಾವು ಸಹ ಮಲ್ಲಸರ್ಜನಿಗೆ ವಿಶ್ವಾಸ ದ್ರೋಹವೆಸಗಿ ಅವನನ್ನು ಬಂಧಿಸಿ ಮೂರು ವರ್ಷಗಳ ಕಾಲ ಪೂನಾದ ಜೈಲಿನಲ್ಲಿಟ್ತರು. ಇದಾಗಿ 1816 ರಲ್ಲಿ ಅಲ್ಲಿಂದ ಬಿಡುಗಡೆಯಾಗಿ ಕಿತ್ತೂರಿಗೆ ಮರಳುತ್ತಿರುವಾಗ ಮಾರ್ಗಮಧ್ಯದಲ್ಲಿಯೇ ಮಲ್ಲಸರ್ಜನು ಕೊನೆಯುಸಿರೆಳೆದನು.

ಇವನ ಬಳಿಕ ಅಧಿಕಾರವನ್ನು ವಹಿಸಿಕೊಂಡಿದ್ದ ಶಿವಲಿಂಗರುದ್ರಸರ್ಜನು ತಾನು ಬ್ರಿಟೀಷರೊಡನೆ ಸ್ನೇಹದಿಂದಿದ್ದನು. ಈ ಒಂದು ಸ್ನೇಹದ ಕುರುಹಾಗಿ ಪ್ರತಿ ವರ್ಷ ಒಂದು ಲಕ್ಷದ ಎಪ್ಪತ್ತು ಸಾವಿರ(1,70,000) ರೂಪಾಯಿ ಬ್ರಿಟೀಷರ ಕೈಸೇರಿರುತ್ತಿತ್ತು! ಶಿವಲಿಂಗರುದ್ರಸರ್ಜನು ತಾನು 11 ಸೆಪ್ಟೆಂಬರ್ 1824 ರಂದು ತನ್ನ ರಾಜ್ಯಕ್ಕೆ ವಾರಸುದಾರರಿಲ್ಲದೆ ತೀರಿಕೊಂಡನು. ಶಿವಲಿಂಗರುದ್ರಸರ್ಜನು ತಾನು ಸಾಯುವ ಸಮಯದಲ್ಲಿ ಆತನ ಮಡದಿಗೆ ಕೇವಲ 11 ವರ್ಷ! ಶಿವಲಿಂಗ ಮಲ್ಲಸರ್ಜನು ತಾನು ಮರಣ ಹೊಂದುವ ಮುನ್ನ ಮಾಸ್ತವರಡಿ ಗೌದರ ಪುತ್ರ ಶಿವಲಿಂಗಪ್ಪನನ್ನು ದತ್ತು ಪಡೆದಿರುತ್ತಾನೆ. ಆದರೆ ಅಂದಿನ ಬ್ರಿಟೀಷರ ಕಂಪನಿ ಸರ್ಕಾರ ಈ ದತ್ತು ಪುತ್ರನು ರಾಜ್ಯದ ಒಡೆಯನಾಗಲು ಸರ್ವಥಾ ನಿರಾಕರಿಸುತ್ತದೆ.  ಆ ಸಮಯದಲ್ಲಿ ಧಾರವಾಡ ಸೀಮೆಯ ಕಲೆಕ್ಟರ್ ಆಗಿದ್ದ ಥ್ಯಾಕರೆಯು ತಾನು ಸ್ವತಃ ಕಿತ್ತೂರಿಗೆ ಭೇಟಿ ನೀಡಿ ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೆ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗ ಮುದ್ರೆ ಹಾಕುತ್ತಾನೆ.

ಕಿತ್ತೂರಿನ್ನು ಬ್ರಿಟೀಷರ ಆಕ್ರಮಣಗಳಿಂದ ರಕ್ಶಿಸಲು ಚೆನ್ನಮ್ಮ ಸಾಕಷ್ಟು ಪ್ರಯತ್ನ ಪಡುತ್ತಾಳೆ. ಮೊದಲು ಬ್ರಿಟೀಷ್ ಅಧಿಕಾರಿಗಳಾಗಿದ್ದ ಥ್ಯಾಕರೆ, ಮನ್ರೋ, ಚಾಪ್ಲಿನ್ ರವರುಗಳಿಗೆ ಸಂಧಾನ ಮಾಡಿಕೊಳ್ಳುವ ಸಲುವಾಗಿ ಪತ್ರ ಬರೆಯುತ್ತಾಳೆ. ಆದರೆ ಬ್ರಿಟೀಷರು ಅದಾಗಲೇ ಕಿತ್ತೂರನ್ನು ವಶಪಡಿಸಿಕೊಂಡೇ ಸಿದ್ದ ಎಂಬ ತೀರ್ಮಾನಕ್ಕೆ ಬಂದಾಗಿರುತ್ತದೆ. ಇದನ್ನರಿತ ಚೆನ್ನಮ್ಮನು ತಾನು ಹಠ ಬಿಡದೆ ನೆರೆ ರಾಜ್ಯದ ರಾಜರುಗಳ ಸಹಕಾರ ಕೋರಿ ಅವರಿಗೂ ಓಲೆ ಕಳುಹಿಸುತ್ತಾಳೆ. ಆದರೆ ಯಾರಿಂದಲೂ ತಕ್ಕ ಸಮಯಕ್ಕೆ ಸಹಕಾರ ದೊರೆಯದೆ ಹೋಗುತ್ತದೆ.

21 ಅಕ್ಟೋಬರ್ 1824 ಕ್ಕೆ ಥ್ಯಾಕರೆ ಕಿತ್ತೂರಿಗೆ ತಾನು ಸೈನ್ಯ ಸನ್ನದ್ದನಾಗಿ ಆಗಮಿಸುತ್ತಾನೆ. 23 ಅಕ್ಟೋಬರ್ 1824 ರಂದು ಥ್ಯಾಕರೆ ಅಧಿಕೃತವಾಗಿ ಯುದ್ದವನ್ನು ಆರಂಭಿಸುತ್ತಾನೆ. ಕೋಟೆಯ ಮೇಲೆ ತೋಪನ್ನು ಹಾರಿಸಲು ಅಪ್ಪಣೆ ಮಾಡಿದ ಥ್ಯಾಕರೆಯ ಸೈನ್ಯದ ಮೇಲೆ ಕೋಟೆಯೊಳಗಿನಿಂದ ನುಗ್ಗಿಬಂದ ಕಿತ್ತೂರಿನ ಸಾವಿರಾರು ಸಂಖ್ಯೆಯ ವೀರರ ಪಡೆ ಒಂದೇ ಸಮನೆ ಧಾಳಿಗೆ ತೊಡಗುತ್ತದೆ. ಚೆನ್ನಮ್ಮಳ ಅಂಗರಕ್ಷಕನಾಗಿದ್ದ ಅಮಟೂರು ಬಾಳಪ್ಪ ಹಾರಿಸಿದ ಗುಂಡಿಗೆ ಥ್ಯಾಕರೆ ಬಲಿಯಾಗುತ್ತಾನೆ. ಸ್ಟೀವನ್ಸನ್ ಹಾಗೂ ಈಲಿಯಟ್ ಎನ್ನುವ ಇಬ್ಬರು ಅಧಿಕಾರಿಗಳು ಸೆರೆಯಾಗುತ್ತಾರೆ. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾಗುತ್ತಾರೆ

ಹೀಗೆ ಮೊದಲ ಬಾರಿಗೆ ಬ್ರಿಟೀಷರ ವಿರುದ್ದ ಕಾಳಗದಲ್ಲಿ ಗೆದ್ದು ತನ್ನ ನಾಡಿನ ಸ್ವಾತಂತ್ರ್ಯ ಪತಾಕೆಯನ್ನು ಹಾರಿಸಿದ ಚೆನ್ನಮ್ಮಳ ವಿರುದ್ದ ಬ್ರಿಟೀಷರು ಒಳ ಒಳಗೇ ಕತ್ತಿ ಮಸೆಯುತ್ತಿರುತ್ತಾರೆ. ಸಣ್ಣ ಸಂಸ್ಥಾನವೊಂದರ ರಾಣಿಯೊಬ್ಬಳಿಂದ ಸೋತು ಅವಮಾನಿತರಾದ ಬ್ರಿಟೀಷರಿಗೆ ಚೆನ್ನಮ್ಮಳ ಮೇಲೆ ಮತ್ತಷ್ಟು ದ್ವೇಷ ಕೆರಳುತ್ತದೆ.

ಇಬ್ಬರ ನಡುವೆ ಮತ್ತೆ ಪತ್ರ ವ್ಯವಹಾರಗಳು ಆರಂಭಗೊಳ್ಳುತ್ತವೆ. ಅದಾಗಿ 1824 ಡಿಸೆಂಬರ್ 2 ರಂದು ಚೆನ್ನಮ್ಮಳಲ್ಲಿ ಸೆರೆಯಾಳಾಗಿದ್ದ ಸ್ಟೀವನ್ಸನ್ ಹಾಗೂ ಈಲಿಯಟ್ ರ ಬಿಡುಗಡೆಯಾಗುತ್ತದೆ. ಇದಾದ ಮರುದಿನ ಎಂದರೆ ಡಿಸೆಂಬರ್ 3 1824 ರಂದು ಬ್ರಿಟೀಷರು ಮತ್ತೆ ಬೃಹತ್ ಸೈನ್ಯದೊಂದಿಗೆ ಕಿತ್ತೂರಿನ ಮೇಲೆ ಮುಗಿಬೀಳುತ್ತಾರೆ. ಡಿಸೆಂಬರ್ 4 ರಂದು ಸರ್ದಾರ ಗುರುಸಿದ್ದಪ್ಪನು ಸೆರೆಯಾಗುತ್ತಾನೆ. ಡಿಸೆಂಬರ್ 5, 1824 ರಂದು ಕೆಚ್ಚೆದೆಯ ವೀರ ರಾಣಿ ಚೆನ್ನಮ್ಮಾಜಿಯು ತಾನು ತನ್ನ ಸೊಸೆಯಂದಿರಾದ ವೀರಮ್ಮ ಹಾಗೂ ಜಾನಕಿಬಯಿಯವರ ಜತೆ ಕೈದಿಯಾಗುತ್ತಾಳೆ. ಅವರನ್ನು ತುರ್ತು ವಿಚಾರಣೆ ನಡೆಸಿದ (ವಿಚಾರಣೆ ನಡೆಸಿದ ನಾಟಕ ಆಡಿದ)  ಬ್ರಿಟೀಷ್ ನ್ಯಾಯಾಸ್ಥಾನವು ಡಿಸೆಂಬರ್ 12 1824 ಕ್ಕೆ ಬೈಲಹೊಂಗಲದ ಕಾರಾಗ್ರಹಕ್ಕೆ ಸ್ಥಳಾಂತರಿಸುತ್ತಾರೆ. ಅಲ್ಲೇ ನಾಲ್ಕು ವರ್ಷಗಳ ಕಾಲ ಸೆರೆಯಾಳಾಗಿದ್ದ ಚೆನ್ನಮ್ಮಾಜಿಯು 1829 ಫೆಬ್ರವರಿ 2 ರಂದು ಅಲ್ಲಿಯೇ ಮರಣಹೊಂದುತ್ತಾಳೆ.

ಚೆನ್ನಮ್ಮಳ ಮರಣದ ಬಳಿಕವೂ ದೇಶನಿಷ್ಠರ ಹೋರಾಟ ಮುಂದುವರಿಯುತ್ತದೆ. ಯುದ್ದ ಖೈದಿಯಾಗಿದ್ದು ಬಿಡುಗಡೆಯಾದ ಅಪ್ರತಿಮ ದೇಶಭಕ್ತ ಸಂಗೊಳ್ಳಿ ರಾಯಣ್ಣನು ತಾನು ಚೆನ್ನಮ್ಮಳ ದತ್ತು ಪುತ್ರ ಶಿವಲಿಂಗಪ್ಪನ ಮುಂದಾಳತ್ವವನ್ನಿಟ್ಟುಕೊಂಡು ಕಿತ್ತೂರಿನ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಾನೆ. ಆದರೆ 1830 ಫೆಬ್ರವರಿಯಲ್ಲಿ ನಮ್ಮವರೇ ಕೆಲ ವಿಶ್ವಾಸ ದ್ರೋಹಿಗಳು ರಾಯಣ್ಣನಿರುವ ಸ್ಥಳವನ್ನು ಕಂಪನಿ ಸರ್ಕಾರದವರಿಗೆ ತೋರಿಸಿ ಅವನನ್ನು ಸೆರೆಹಿಡಿಸುತ್ತಾರೆ. ಅದೇ 1830 ಮೇ ನಲ್ಲಿ ಕಿತ್ತೂರ ದೊರೆಯಾದ ಶಿವಲಿಂಗಪ್ಪ ಮತ್ತವನ ನಾಲ್ಕು ಸಾವಿರ ಬೆಂಬಲಿಗರು ತಾವು ಬ್ರಿಟೀಷರಿಗೆ ಸ್ವಯಂ ಶರಣಾಗುತ್ತಾರೆ.  ಇದಾದ ಬಳಿಕ ಜುಲೈ 1830 ಕ್ಕೆ ಚೆನ್ನಮ್ಮಳ ಪ್ರೀತಿಯ ಸೊಸೆ ವೀರಮ್ಮ ತಾನು ಸೆರೆಮನೆಯಲ್ಲಿಯೇ ಸಾವನ್ನಪ್ಪುತ್ತಾಳೆ.

ಸರಿಸುಮಾರು ಆರು ತಿಂಗಳುಗಳ ತರುವಾಯ 1831, ಜನವರಿ 26 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಲಾಗುತ್ತದೆ.

ಹೀಗೆ ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಟ ನಡೆಸಿದ ಕನ್ನಡ ನಾಡಿನ ಹೆಮ್ಮೆಯ ಮಹಿಳೆ ರಾಣಿ ಚೆನ್ನಮ್ಮಳ ಅಗಾಧ ದೇಶಪ್ರೇಮವು ಎಲ್ಲರಿಗೂ ಮಾದರಿಯಾಗುವಂತಹುದು. ಆಕೆಯ ಸ್ಮೃತಿ ದಿನವಾದ ಇಂದು ಕನ್ನಡಿಗರಾದ ನಾವೆಲ್ಲರೂ ಅವಳ ಹೋರಾಟವನ್ನು ನೆನೆಯುತ್ತಾ ಅವಳಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ದೇಶದುದ್ದಗಲದ ಎಲ್ಲಾ ವಿರರ ತ್ಯಾಗ ಬಲಿದಾನಗಳನ್ನು ಸ್ಮರಿಸೋಣ. ಆ ಮುಖೇನ ಅವರ ಆದರ್ಶತಮ ಬದುಕಿಗೆ ವಂದಿಸೋಣ.🙏🙏

ಜೈ ಹಿಂದ್ 🇮🇳


Comments

Popular posts from this blog

ಸ್ವಾತಂತ್ರ್ಯ_ಯಾರಿಂದ_ಬಂತು... ಲಾಲಾ_ಲಜಪತ್_ರಾಯ್ 🙏🙏

ಕಾರ್ಗಿಲ್ ವೀರ ಯೋಧರ ನೆನಪು 🙏😍🇮🇳

ಸ್ವಾತಂತ್ರ್ಯ_ಯಾರಿಂದ_ಬಂತು.. #ರಾಜಗುರು 🙏🙏